ಪೌಲ ಮತ್ತು ಸೀಲರನ್ನು ಸೆರೆಯಲ್ಲಿ ಹಾಕಲ್ಪಟ್ಟದ್ದು
16 ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ16:16 ಭವಿಷ್ಯ ಹೇಳುವ ದುರಾತ್ಮವುಳ್ಳ ಹೆಣ್ಣುಮಗಳು ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು. 17 ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; "ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ" ಎಂದು ಕೂಗಿ ಹೇಳುತ್ತಿದ್ದಳು. 18 ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; "ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ" ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು. 20 ಅವರನ್ನು ಅಧಿಕಾರಿಗಳ ಮುಂದೆ ತಂದು; "ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ; 21 ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ" ಅಂದರು. 22 ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು. 23 ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು. 24 ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
ಭೂಕಂಪ ಉಂಟಾಗಿ ಅವರು ಬಿಡಿಸಲ್ಪಟ್ಟದ್ದು
25 ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು. 26 ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು. 27 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು. 28 ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; "ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ" ಎಂದು ಹೇಳಿದನು. 29 ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು. 30 ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; "ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?" ಕೇಳಲು, 31 ಅವರು; "ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು" ಎಂದು ಹೇಳಿ, 32 ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು. 33 ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು. 34 ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
35 ಬೆಳಗಾದ ಮೇಲೆ ಅಧಿಕಾರಿಗಳು; "ಆ ಮನುಷ್ಯರನ್ನು ಬಿಟ್ಟುಬಿಡು" ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು. 36 ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; "ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ" ಎಂದು ಹೇಳಿದನು. 37 ಅದಕ್ಕೆ ಪೌಲನು; "ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ" ಎಂದು ಹೇಳಿದನು. 38 ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು. 39 ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. 40 ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.