11 ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, "ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ? 12 ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ. 13 ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’" ಅಂದನು. 14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.