1 "ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ!
ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.
2 ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ?
ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
3 ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ;
ಆಲಿಸಿದರೆ ಬದುಕಿ ಬಾಳುವಿರಿ.
ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ" ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
4 ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ,
ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.
5 ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ,
ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ
ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.
6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ,
ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.