11 ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು. 12 ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು. 13 ಆದರೆ ಆ ದೂತನು ಅವನಿಗೆ, "ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. 14 ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. 15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು. 16 ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. 17 ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು" ಎಂದು ಹೇಳಿದನು.