ಒಳ್ಳೆಯ ಸಮಾರ್ಯದವನ ಸಾಮ್ಯ
25 ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, "ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?" ಎಂದು ಕೇಳಲು, 26 ಆತನು ಅವನಿಗೆ, "ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?" ಎಂದು ಕೇಳಿದನು. 27 ಅದಕ್ಕೆ ಅವನು, "‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ" ಅಂದನು. 28 ಆತನು ಅವನಿಗೆ, "ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ" ಎಂದು ಹೇಳಿದನು. 29 ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, "ನನ್ನ ನೆರೆಯವನು ಯಾರು?" ಎಂದು ಯೇಸುವನ್ನು ಕೇಳಲು, 30 ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, "ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು. 31 ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು. 32 ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು. 33 ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ, 34 ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. 35 ಮರುದಿನ ಅವನು ಎರಡು ದಿನಾರಿಗಳನ್ನು10:35 ಒಂದು ದಿನಾರಿ ಅಂದರೆ ಒಂದು ಬೆಳ್ಳಿ ನಾಣ್ಯ. ಅದು ಒಂದು ದಿನದ ಕೂಲಿಗೆ ಸಮವಾಗಿದೆ. ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು. 36 ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?" ಎಂದು ಕೇಳಿದ್ದಕ್ಕೆ, 37 ಆ ಧರ್ಮೋಪದೇಶಕನು, "ಅವನಿಗೆ ದಯೆ ತೋರಿಸಿದವನೇ" ಅಂದನು. ಆಗ ಯೇಸು ಅವನಿಗೆ, "ಹೋಗು, ನೀನೂ ಅದರಂತೆ ಮಾಡು" ಎಂದು ಹೇಳಿದನು.