22 ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, "ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ" ಹೇಳುತ್ತಿದ್ದರು. 23 ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, "ಸೈತಾನನು ಸೈತಾನನನ್ನು ಬಿಡಿಸುವುದುಂಟೇ? 24 ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು; 25 ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು. 26 ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು. 27 ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು. 28 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು. 29 ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು" ಎಂದು ಹೇಳಿದನು. 30 ಅವರು "ಈತನಲ್ಲಿ ಅಶುದ್ಧಾತ್ಮವಿದೆ" ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.