25 ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು. 26 ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು. 27 ಸೆರೆಮನೆಯ ಅಧಿಕಾರಿ ಎಚ್ಚತ್ತುಕೊಂಡು, ಸೆರೆಮನೆಯ ಬಾಗಿಲುಗಳು ತೆರೆದಿರುವುದನ್ನು ಕಂಡು, ಸೆರೆಯಾಳುಗಳು ತಪ್ಪಿಸಿಕೊಂಡು ಹೋಗಿರಬಹುದೆಂದು ಭಾವಿಸಿ, ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು. 28 ಆದರೆ ಪೌಲನು, "ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ," ಎಂದು ಗಟ್ಟಿಯಾಗಿ ಕೂಗಿದನು.
29 ಅವನು ದೀಪ ತರಬೇಕೆಂದು ಹೇಳಿ ಓಡಿಹೋಗಿ ಭಯದಿಂದ ನಡುಗುತ್ತಾ ಪೌಲ, ಸೀಲರ ಮುಂದೆ ಅಡ್ಡಬಿದ್ದನು. 30 ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, "ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?" ಎಂದನು.
31 "ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು," ಎಂದರು. 32 ಆಮೇಲೆ ಅವರು ಅವನಿಗೂ ಅವನ ಮನೆಯವರೆಲ್ಲರಿಗೂ ಕರ್ತ ಯೇಸುವಿನ ಸುವಾರ್ತೆಯನ್ನು ತಿಳಿಸಿದರು. 33 ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು. 34 ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.