ದೆವ್ವ ಪೀಡಿತನನ್ನು ಗುಣಪಡಿಸಿದ್ದು
1 ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು. 2 ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು. 3 ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ. 4 ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ. 5 ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ, 7 ಮಹಾಶಬ್ದದಿಂದ ಆರ್ಭಟಿಸಿ, "ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!" ಎಂದು ಅರಚಿದನು. 8 ಏಕೆಂದರೆ ಯೇಸು ಅವನಿಗೆ, "ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!" ಎಂದು ಹೇಳಿದ್ದರು.
9 ಅನಂತರ, ಯೇಸು ಅವನಿಗೆ, "ನಿನ್ನ ಹೆಸರೇನು?" ಎಂದು ಕೇಳಿದಾಗ,
"ನನ್ನ ಹೆಸರು ಸೇನೆ,5:9 ಸೇನೆ ಗ್ರೀಕ್ ಭಾಷೆಯಲ್ಲಿ ಲೀಜನ್ ಅಂದರೆ ಸುಮಾರು 4000 ದಿಂದ 6000 ಸೈನ್ಯದ ಸಮೂಹ. ಏಕೆಂದರೆ ನಾವು ಬಹುಮಂದಿ ಇದ್ದೇವೆ," ಎಂದು ಹೇಳಿದನು. 10 ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
11 ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು. 12 "ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ," ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. 13 ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
14 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.