ದೆವ್ವ ಪೀಡಿತನನ್ನು ಗುಣಪಡಿಸಿದ್ದು
1 ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು. 2 ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು. 3 ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ. 4 ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ. 5 ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ, 7 ಮಹಾಶಬ್ದದಿಂದ ಆರ್ಭಟಿಸಿ, "ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!" ಎಂದು ಅರಚಿದನು. 8 ಏಕೆಂದರೆ ಯೇಸು ಅವನಿಗೆ, "ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!" ಎಂದು ಹೇಳಿದ್ದರು.
9 ಅನಂತರ, ಯೇಸು ಅವನಿಗೆ, "ನಿನ್ನ ಹೆಸರೇನು?" ಎಂದು ಕೇಳಿದಾಗ,
"ನನ್ನ ಹೆಸರು ಸೇನೆ,5:9 ಸೇನೆ ಗ್ರೀಕ್ ಭಾಷೆಯಲ್ಲಿ ಲೀಜನ್ ಅಂದರೆ ಸುಮಾರು 4000 ದಿಂದ 6000 ಸೈನ್ಯದ ಸಮೂಹ. ಏಕೆಂದರೆ ನಾವು ಬಹುಮಂದಿ ಇದ್ದೇವೆ," ಎಂದು ಹೇಳಿದನು. 10 ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
11 ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು. 12 "ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ," ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. 13 ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
14 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು. 15 ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು. 16 ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು. 17 ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.
18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು. 19 ಯೇಸು ಅದಕ್ಕೊಪ್ಪದೆ ಅವನಿಗೆ, "ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು," ಎಂದರು. 20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ5:20 ಅಂದರೆ, ಹತ್ತು ಪಟ್ಟಣಗಳು ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.