ಯಾಯೀರನ ಸತ್ತ ಮಗಳು ಮತ್ತು ರಕ್ತಸ್ರಾವ ರೋಗಿಯಾದ ಸ್ತ್ರೀ
21 ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು. 22 ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು, 23 "ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು," ಎಂದು ಬಹಳವಾಗಿ ಬೇಡಿಕೊಂಡನು. 24 ಆಗ ಯೇಸು ಅವನೊಂದಿಗೆ ಹೋದರು.
ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು. 25 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. 26 ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು. 27 ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು. 28 ಏಕೆಂದರೆ, "ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು," ಎಂದುಕೊಂಡಿದ್ದಳು. 29 ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
30 ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, "ನನ್ನ ಉಡುಪನ್ನು ಮುಟ್ಟಿದವರು ಯಾರು?" ಎಂದು ಕೇಳಿದರು.
31 ಯೇಸುವಿನ ಶಿಷ್ಯರು ಅವರಿಗೆ, "ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?" ಎಂದರು.
32 ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು. 33 ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು. 34 ಯೇಸು ಆ ಸ್ತ್ರೀಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ," ಎಂದು ಹೇಳಿದರು.
35 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, "ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?" ಎಂದರು.
36 ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, "ಭಯಪಡಬೇಡ ನಂಬಿಕೆ ಮಾತ್ರ ಇರಲಿ," ಎಂದರು.
37 ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ. 38 ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು. 39 ಯೇಸು ಮನೆಯೊಳಗೆ ಹೋಗಿ, "ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ," ಎಂದರು. 40 ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು.
ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು. 41 ಯೇಸು ಆಕೆಯ ಕೈಹಿಡಿದು, "ತಲಿಥಾ ಕೂಮ್!" ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, "ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!" ಎಂಬುದು. 42 ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು. 43 ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.